ಪರಿಷತ್ ಚುನಾವಣೆ: ಜೆಡಿಎಸ್​ ಜೊತೆಗಿನ ಮೈತ್ರಿ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮೇ 11ರಂದು ಬಿಜೆಪಿ ಸಭೆ

Ravi Talawar
WhatsApp Group Join Now
Telegram Group Join Now

ಬೆಂಗಳೂರು,08: ಲೋಕಸಭೆಗೆ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡಿದ್ದ ಬಿಜೆಪಿ ಜೆಡಿಎಸ್ ಮೈತ್ರಿ ಜೂನ್ 3ರಂದು ನಡೆಯಲಿರುವ 03 ಪದವೀಧರ ಕ್ಷೇತ್ರ ಮತ್ತು 03 ಶಿಕ್ಷಕರ ಕ್ಷೇತ್ರದ ಚುನಾವಣೆಗೂ ಮುಂದುವರೆಸುವ ಕುರಿತು ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆದಿದೆ. ಈ ಸಂಬಂಧ ಮೇ 11ರಂದು ರಾಜ್ಯ ಬಿಜೆಪಿ ನಾಯಕರು ಮಹತ್ವದ ಸಭೆ ನಡೆಸಿ ರಾಜ್ಯ ಘಟಕದ ಅಭಿಪ್ರಾಯವನ್ನು ಹೈಕಮಾಂಡ್​​ಗೆ ಸಲ್ಲಿಕೆ ಮಾಡಲಿದ್ದಾರೆ.

ಬಿಜೆಪಿ ನೇತೃತ್ವದ ಎನ್​ಡಿಎ ಕೂಟ ಸೇರಿರುವ ಜೆಡಿಎಸ್ ಜೊತೆಗಿನ ಮೈತ್ರಿಯನ್ನು ಲೋಕಸಭಾ ಚುನಾವಣೆ ನಂತರದಲ್ಲಿಯೂ ಮುಂದುವರೆಸುವ ಘೋಷಣೆ ಮಾಡಿದ್ದ ಬಿಜೆಪಿ ನಾಯಕರು, ಇದೀಗ ಹೈಕಮಾಂಡ್ ಕಡೆ ಬೆರಳು ತೋರುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬ್ಯುಸಿಯಾಗಿರುವ ವರಿಷ್ಠರು ಪರಿಷತ್ ಚುನಾವಣೆ ಕುರಿತು ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಹಾಗಾಗಿ, ಈ ಕುರಿತು ಯಾವುದೇ ನಿರ್ದೇಶನ ನೀಡಿಲ್ಲ. ಆದರೆ, ಮೈತ್ರಿಯಾಗಿ ಚುನಾವಣೆ ಎದುರಿಸಬೇಕಾ ಅಥವಾ ಸ್ವತಂತ್ರವಾಗಿ ಎಲ್ಲ ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಾ ಎನ್ನುವ ಗೊಂದಲ ರಾಜ್ಯ ನಾಯಕರನ್ನು ಕಾಡುತ್ತಿದೆ. ಹೀಗಾಗಿ, ಹೈಕಮಾಂಡ್ ನಾಯಕರನ್ನು ಸಂಪರ್ಕ ಮಾಡಿರುವ ರಾಜ್ಯ ಘಟಕ ಮೈತ್ರಿ ಕುರಿತು ಸ್ಪಷ್ಟೀಕರಣ ಬಯಸಿದೆ.

ಈ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿರ್ದೇಶನ ನೀಡದಿರುವ ವರಿಷ್ಠರು, ಚುನಾವಣೆ ಕುರಿತು ಪ್ರಾಥಮಿಕ ಸಭೆ ನಡೆಸಿ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ ಹೈಕಮಾಂಡ್​​ಗೆ ಕಳಿಸಿಕೊಡುವಂತೆ ಸೂಚಿಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಆರೋಪ ವಿಚಾರ ದೇಶಾದ್ಯಂತ ಸುದ್ದಿಯಾಗಿದ್ದು, ಮಿತ್ರಪಕ್ಷದ ಅಭ್ಯರ್ಥಿ ವಿರುದ್ಧ ಕೇಳಿಬಂದಿರುವ ಆರೋಪದಿಂದಾಗಿ ಬಿಜೆಪಿಗೆ ಮುಜುಗರವಾಗಿದೆ. ಆದರೂ ಮೈತ್ರಿ ಲೋಕಸಭೆಗೆ ಮಾತ್ರವಲ್ಲ ಮುಂಬರಲಿರುವ ಚುನಾವಣೆಗಳಿಗೂ ಇರಲಿದೆ ಎನ್ನುವ ಹೇಳಿಕೆಗೂ ಬಿಜೆಪಿ ಬದ್ಧವಾಗಬೇಕಿದೆ.

ಹಾಗಾಗಿ, ಪರಿಷತ್ ಚುನಾವಣೆಗೂ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಈ ಆಯಾಮದಲ್ಲಿಯೇ ಅಭ್ಯರ್ಥಿಗಳ ಆಯ್ಕೆ ಕುರಿತು ಸಮಾಲೋಚನೆ ನಡೆಸಲು ಮೇ 11 ರಂದು ಸಭೆ ಕರೆಯಲಾಗಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಉಪಸ್ಥಿತರಿರಲಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಮತ್ತು ಮೈತ್ರಿ ಮುಂದುವರಿಕೆ ಕುರಿತು ಅಂದು ಮಹತ್ವದ ಸಮಾಲೋಚನೆ ನಡೆಸಿ ಕೇಂದ್ರಕ್ಕೆ ಮಾಹಿತಿ ಕಳುಹಿಸಿಕೊಡಲಾಗುತ್ತದೆ.

ಈ ಕುರಿತು ‘ಈಟಿವಿ ಭಾರತ’ಕ್ಕೆ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಮಾಹಿತಿ ನೀಡಿದ್ದು, ”ಜೂನ್ 3ರಂದು ನಡೆಯಲಿರುವ 03 ಪದವೀಧರ ಕ್ಷೇತ್ರ ಮತ್ತು 03 ಶಿಕ್ಷಕರ ಕ್ಷೇತ್ರದ ಚುನಾವಣೆಗೂ ಮುಂದುವರೆಸುವ ಕುರಿತು ಚರ್ಚಿಸಿ, ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ” ಎಂದು ತಿಳಿಸಿದ್ದಾರೆ.

 2018ರ ಚುನಾವಣೆಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಚಂದ್ರಶೇಖರ್‌ ಪಾಟೀಲ್‌, ನೈಋತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿಯಿಂದ ಪ್ರತಿನಿಧಿಸಿದ್ದ ಆಯನೂರು ಮಂಜುನಾಥ್‌, ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಸದಸ್ಯ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಸದಸ್ಯ ವೈ.ಎ.ನಾರಾಯಣಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್‌ ಸದಸ್ಯ ಭೋಜೇಗೌಡ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ನಿಂದ ಪ್ರತಿನಿಧಿಸುತ್ತಿದ್ದ ಮರಿತಿಬ್ಬೇಗೌಡ ಅವರ ಅಧಿಕಾರಾವಧಿಯು ಜೂನ್​ 21ಕ್ಕೆ ಮುಕ್ತಾಯಗೊಳ್ಳಲಿದೆ. ಇವರಿಂದ ತೆರವಾಗುತ್ತಿರುವ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕೆ.ಬಿ.ಶ್ರೀನಿವಾಸ್, ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಆಯನೂರು ಮಂಜುನಾಥ್‌, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ.ನಾರಾಯಣಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ನಿರಂಜನಮೂರ್ತಿ ಬಿಜೆಪಿ ಅಭ್ಯರ್ಥಿಗಳಾಗಿದ್ದರು. ಇದರಲ್ಲಿ ಬಿಜೆಪಿಯಿಂದ ಆಯನೂರು ಮಂಜುನಾಥ್, ಅ.ದೇವೇಗೌಡ ಮತ್ತು ವೈ.ಎ.ನಾರಾಯಣಸ್ವಾಮಿ ಗೆದ್ದಿದ್ದರು.

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ ಸದಸ್ಯ ಭೋಜೇಗೌಡ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿ ಮರಿತಿಬ್ಬೇಗೌಡ ಗೆದ್ದಿದ್ದರು. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಚಂದ್ರಶೇಖರ್‌ ಪಾಟೀಲ್‌ ಜಯ ಸಾಧಿಸಿದ್ದರು. ಆ ಮೂಲಕ 6 ಸ್ಥಾನಗಳಲ್ಲಿ ಬಿಜೆಪಿ ಮೂರು, ಜೆಡಿಎಸ್ ಎರಡು ಕಾಂಗ್ರೆಸ್ ಒಂದು ಸ್ಥಾನ ಹೊಂದಿದೆ. ಆದರೆ, ಇದರಲ್ಲಿ ಸದ್ಯ ಆಯನೂರು ಮಂಜುನಾಥ್ ಬಿಜೆಪಿ ತೊರೆದು ಕಾಂಗ್ರೆಸ್​​ನಲ್ಲಿದ್ದರೆ, ಮರಿತಿಬ್ಬೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಹಾಗಾಗಿ, ಆ ಸ್ಥಾನಗಳಿಗೆ ಮಿತ್ರಪಕ್ಷಗಳೆರಡೂ ಹೊಸ ಅಭ್ಯರ್ಥಿಯ ಆಯ್ಕೆ ಮಾಡಬೇಕಿದೆ.

ಮೂಲಗಳ ಪ್ರಕಾರ ಲೋಕಸಭಾ ಚುನಾವಣೆಯಲ್ಲಿ ಮತಗಳ ಹಂಚಿಕೆಯ ಬಗ್ಗೆ ಬಿಜೆಪಿ ವರಿಷ್ಠರಿಗೆ ತೃಪ್ತಿ ಇದೆ. ಸಾಕಷ್ಟು ಕ್ಷೇತ್ರಗಳಲ್ಲಿ ಜೆಡಿಎಸ್ ಮತಗಳು ಬಿಜೆಪಿ ಶೇಕಡಾವಾರು ಮತಗಳಿಕೆ ಪ್ರಮಾಣ ಹೆಚ್ಚಳಕ್ಕೆ ಸಹಕಾರಿಯಾಗಿವೆ ಎನ್ನುವ ನಿಲುವಿಗೆ ಬಂದಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಮೈತ್ರಿಯನ್ನು ಬಲಪಡಿಸುವ ಚಿಂತನೆ ವರಿಷ್ಠರಲ್ಲಿದೆ ಎನ್ನಲಾಗಿದೆ. ಹಾಗಾಗಿಯೇ ಜೆಡಿಎಸ್ ಗೆದ್ದಿದ್ದ ಎರಡು ಕ್ಷೇತ್ರಗಳನ್ನು ಆ ಪಕ್ಷಕ್ಕೇ ಬಿಟ್ಟು, ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಲಿದೆ ಎನ್ನಲಾಗುತ್ತಿದೆ. ಇದೆಲ್ಲವೂ ಮೇ 11ರ ಸಭೆಯಲ್ಲಿ ಅಂತಿಮಗೊಂಡು ಅಧಿಕೃತವಾಗಿ ಪ್ರಕಟಗೊಳ್ಳಲಿದೆ.

WhatsApp Group Join Now
Telegram Group Join Now
Share This Article