ಹಾಸನ ಪೆನ್‌ಡ್ರೈವ್ ಕೇಸ್ ಕುರಿತು ಕಠಿಣ ಕ್ರಮ ಜರುಗಿಸಿ: ಸಿಎಂ ಸಿದ್ದರಾಮ್ಯಗೆ ರಾಹುಲ್ ಪತ್ರ

Ravi Talawar
WhatsApp Group Join Now
Telegram Group Join Now

ಬೆಂಗಳೂರು04: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮದ ಜೊತೆಗೆ ಸಂತ್ರಸ್ತೆಯರಿಗೆ ಸಾಧ್ಯವಾದ ಎಲ್ಲ ರೀತಿಯ ಸಹಕಾರ ನೀಡುವಂತೆ ಕೋರಿ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಆರೋಪಿ ಹಲವು ವರ್ಷಗಳಿಂದ ನೂರಾರು ಮಹಿಳೆಯರ ಮೇಲೆ ಸೌರ್ಜನ್ಯ ಎಸಗಿದ್ದಾನೆ. ಸಹೋದರಿಯರು, ತಾಯಿಯಂದಿರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದವರ ವಿರುದ್ಧ ಕಠಿಣ ಶಿಕ್ಷೆಯಾಗಬೇಕು. ಬಿಜೆಪಿ ಮುಖಂಡ ದೇವೇರಾಜೇಗೌಡ ಈ ಪ್ರಕರಣದ ಸಂಬಂಧ ಡಿಸೆಂಬರ್ 2023ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮಾಹಿತಿ ನೀಡಿದ್ದರು. ಜೊತೆಗೆ ಆರೋಪಿಯ ಲೈಂಗಿಕ ದೌರ್ಜನ್ಯದ ಬಗ್ಗೆ ವಿವರಿಸಿದ್ದರು. ಆದರೂ ಪ್ರಧಾನಿ ಮೋದಿ ಅವರು ಆರೋಪಿ ಪರ ಪ್ರಚಾರ ನಡೆಸಿರುವುದು ಆಘಾತಕಾರಿ ವಿಷಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿ ವಿದೇಶಕ್ಕೆ ಹೋಗಲು ಕೇಂದ್ರ ಸರ್ಕಾರ ಅನುವು ಮಾಡಿ ಕೊಟ್ಟಿದೆ. ಆರೋಪಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆಶೀರ್ವಾದ ಹೊಂದಿದ್ದು, ಇದನ್ನು ತೀವ್ರವಾಗಿ ಖಂಡಿಸಬೇಕು. ನನ್ನ ಎರಡು ದಶಕಗಳ ಸಾರ್ವಜನಿಕ ಜೀವನದಲ್ಲಿ ಹಿರಿಯ ಜನಪ್ರತಿನಿಧಿಯೊಬ್ಬರು ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯವಾದರೂ ಸುಮ್ಮನಿರುವುದನ್ನು ನಾನು ನೋಡಿಲ್ಲ. ಹರಿಯಾಣದ ಕುಸ್ತಿಪಟುಗಳಿಂದ ಹಿಡಿದು ಮಣಿಪುರದ ನಮ್ಮ ಸಹೋದರಿಯರವರೆಗೆ ಪ್ರಧಾನಿ ಮೋದಿ ಕ್ರಿಮಿನಲ್​​ಗಳ ಬೆನ್ನಿಗೆ ನಿಂತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನಮ್ಮ ಸಹೋದರಿಯರು, ತಾಯಂದಿರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಹೋರಾಟ ಮಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದಾಗಿದೆ. ಪ್ರಕರಣ ಸಂಬಂಧ ತನಿಖೆಗಾಗಿ ಎಸ್​ಐಟಿ ರಚನೆ ಮಾಡಲಾಗಿದೆ. ಜೊತೆಗೆ ಆರೋಪಿಯ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿ ಮತ್ತು ಭಾರತಕ್ಕೆ ಗಡಿಪಾರು ಮಾಡುವ ಸಂಬಂಧ ಪ್ರಧಾನಿಗೆ ನೀವು ಪತ್ರ ಬರೆದಿರುವ ಬಗ್ಗೆ ನನಗೆ ತಿಳಿದಿದೆ. ಈ ಹೀನ ಕೃತ್ಯ ಎಸಗಿದ ಆರೋಪಿ ಮೇಲೆ ಕಠಿಣ ಕ್ರಮ ವಹಿಸಿ ಎಂದು ಪತ್ರದಲ್ಲಿ ಕೋರಿದ್ದಾರೆ.

WhatsApp Group Join Now
Telegram Group Join Now
Share This Article