ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ: ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ

Ravi Talawar
WhatsApp Group Join Now
Telegram Group Join Now

ಬೆಂಗಳೂರು,24 : ರಾಜ್ಯದ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯಲಿದ್ದು, ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕೊನೆಯ ದಿನ ಅಭ್ಯರ್ಥಿಗಳು ಮನೆ, ಮನೆಗೆ ತೆರಳಿ ಮತಯಾಚನೆ ಮಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು – ಕೊಡಗು, ಚಾಮರಾಜನಗರ, ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಿಗೆ ಏ.26 ರಂದು ಚುನಾವಣೆ ನಡೆಯಲಿದೆ. ಹಾಗಾಗಿ, ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದ ನಂತರ ಮತದಾರರಲ್ಲದ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು ಆಯಾ ಕ್ಷೇತ್ರಗಳಿಂದ ತೆರಳಬೇಕಿದೆ. ಈ ಬಗ್ಗೆ ಈಗಾಗಲೇ ಚುನಾವಣಾ ಆಯೋಗ ಸಂಬಂಧಪಟ್ಟ ಚುನಾವಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದು, ವಸತಿ ಗೃಹಗಳು, ಸಮುದಾಯ ಭವನಗಳು ಸೇರಿದಂತೆ ತಪಾಸಣೆ ನಡೆಸಲು ಸೂಚಿಸಿದೆ. ಚೆಕ್ ಪೋಸ್ಟ್​​ಗಳಲ್ಲಿ ಕೂಡ ತಪಾಸಣೆ ನಡೆಸಿ ಮತದಾರರಲ್ಲದವರನ್ನು ಪತ್ತೆಹಚ್ಚಿ ಹೊರಗೆ ಕಳುಹಿಸಲು ನಿರ್ದೇಶನ ನೀಡಿದೆ.

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಒಟ್ಟು 247 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ 14 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಬಿಜೆಪಿ 11 ಹಾಗೂ ಜೆಡಿಎಸ್ 3 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿವೆ. 226 ಪುರುಷ ಹಾಗೂ 21 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಪ್ರಮುಖ ರಾಜಕೀಯ ಪಕ್ಷಗಳ ನಾಯಕರು, ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರು ಬೇಸಿಗೆ ಬಿರು ಬಿಸಿಲನ್ನು ಲೆಕ್ಕಿಸದೇ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ನಡುವೆ ಆರೋಪ, ಪ್ರತ್ಯಾರೋಪ ತಾರಕಕ್ಕೇರಿದೆ. ಸಂಜೆ ವೇಳೆಗೆ ರೋಡ್ ಶೋ, ಬಹಿರಂಗ ಸಭೆ ಹಾಗೂ ಸಮಾವೇಶಗಳನ್ನು ಮುಗಿಸಬೇಕಿದೆ. ಹಾಗಾಗಿ, ಪ್ರಚಾರದ ಅಬ್ಬರವೂ ಜೋರಾಗಿದೆ.

WhatsApp Group Join Now
Telegram Group Join Now
Share This Article